ಕಾವೇರಿ ನೀರು ವಿವಾದ : ಕೇಂದ್ರ ಜಲ ಶಕ್ತಿ ಸಚಿವರ ಜೊತೆ ಏನೆಲ್ಲಾ ಚರ್ಚೆಯಾಯ್ತು? ಸಿದ್ದರಾಮಯ್ಯ ಹೇಳಿದ್ದೇನು?

Siddaramaiah On Cauvery Water Dispute : ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಧಾನಿ ಮೋದಿ ಅವರ ಭೇಟಿಗೂ ಸಮಯಾಕಾಶ ಕೇಳಿದ್ದೇವೆ ಎಂದು ಸಿಎಂ ತಿಳಿಸಿದ್ದಾರೆ.

ಕಾವೇರಿ ನೀರು ವಿವಾದ : ಕೇಂದ್ರ ಜಲ ಶಕ್ತಿ ಸಚಿವರ ಜೊತೆ ಏನೆಲ್ಲಾ ಚರ್ಚೆಯಾಯ್ತು? ಸಿದ್ದರಾಮಯ್ಯ ಹೇಳಿದ್ದೇನು?
ಹೊಸದಿಲ್ಲಿ : ಕಾವೇರಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರ ಜತೆ ಸಭೆ ನಡೆಸಿದ್ದೇವೆ. ಸದ್ಯಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ಅವರ ಭೇಟಿಗೂ ಸಮಯವನ್ನೂ ಕೇಳಿದ್ದೇವೆ ಎಂದು ತಿಳಿಸಿದ್ದಾರೆ.ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರ ಜತೆಗಿನ ಸಭೆಯ ಬಳಿಕ ಡಿಸಿಎಂ, ಜಲ ಸಂಪನ್ಮೂಲ ಖಾತೆ ಸಚಿವ ಡಿಕೆ ಶಿವಕುಮಾರ್ ಅವರ ಜೊತೆ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಂಕಷ್ಟದ ಪರಿಸ್ಥಿತಿಯನ್ನು ಕೇಂದ್ರ ಸಚಿವರಿಗೆ ಸಮರ್ಥವಾಗಿ ತಿಳಿಸಿದ್ದೇವೆ. ಅವರ ಸ್ಪಂದನೆ ಸಕಾರಾತ್ಮಕವಾಗಿತ್ತು ಎಂದು ಹೇಳಿದರು. ಸುಪ್ರೀಂ ಕೋರ್ಟ್‌ ನಲ್ಲೂ ನಮ್ಮ ಮನವಿ ವಿಚಾರಣೆಗೆ ಬರಲಿದೆ. ಸುಪ್ರೀಂ ಕೋರ್ಟ್ ನಮ್ಮ ಮನವಿಯನ್ನು ಪುರಸ್ಕರಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ತಡೆಯಾಜ್ಞೆ ನೀಡುವ ಭರವಸೆ ಇದೆ. ಹೀಗಾಗಿ ನಾವು ಸುಪ್ರೀಂ ಕೋರ್ಟ್ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಬಳಿಕ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ವಿವರಿಸಿದರು. ಆದರೆ, ಸುಪ್ರಿಂ ಕೋರ್ಟ್‌ ಕರ್ನಾಟಕದ ಮನವಿಯನ್ನು ತಿರಸ್ಕರಿಸಿದೆ.ನಾವು ಪ್ರಧಾನಿ ಅವರ ಸಮಯವನ್ನೂ ಕೇಳಿದ್ದೇವೆ. ಸಮಯ ಸಿಕ್ಕರೆ ಭೇಟಿ ಆಗುತ್ತೇವೆ. ನಾಲ್ಕೂ ರಾಜ್ಯದವರನ್ನು ಕರೆಸಿ ಮಾತನಾಡಲು ಮಧ್ಯ ಪ್ರವೇಶಿಸಿ ಎಂದು ಪ್ರಧಾನಿಗೆ ಮನವಿ ಮಾಡುತ್ತೇವೆ.

ಸುದ್ದಿಗೋಷ್ಠಿಯ ಇತರೆ ಅಂಶಗಳು:

  • ನಮಗೆ ಬೆಳೆ ರಕ್ಷಣೆ, ಕುಡಿಯುವ ನೀರು ಮತ್ತು ಕೈಗಾರಿಕೆಗಳಿಗೆ 106 ಟಿಎಂಸಿ ನೀರು ಅಗತ್ಯವಿದೆ . ಆದರೆ, ನಮ್ಮ ನಾಲ್ಕೂ ಜಲಾಶಯಗಳಿಂದ ಕೇವಲ 51 ಟಿಎಂಸಿ ನೀರು ಇದೆ ಎನ್ನುವುದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ್ದೇವೆ
  • 123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಬಿದ್ದು ಜಲಾಶಯಗಳ ಒಳ ಹರಿವು ಇಲ್ಲವಾಗಿದೆ ಎಂದು ಸಚಿವರ ಗಮನ ಸೆಳೆದಿದ್ದೇವೆ
  • ನಮ್ಮ ರೈತರು ಮತ್ತು ನಾನಾ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಬಿಡುವುದಕ್ಕೆ ನಮ್ಮ ಬಳಿ ನೀರೇ ಇಲ್ಲ ಎಂದೂ ಹೇಳಿದ್ದೇವೆ
  • ಸುಪ್ರೀಂಕೋರ್ಟ್ ಗೂ ನಮ್ಮ ಸಂಕಷ್ಟದ ಪರಿಸ್ಥಿತಿಯನ್ನು ನಮ್ಮ ಲೀಗಲ್ ತಂಡ ಮನವರಿಕೆ ಮಾಡಿಸಲು ಯತ್ನಿಸುತ್ತಿದೆ
  • ನಾಲ್ಕೂ ಜಲಾಶಯಗಳ ಒಳ ಹರಿವು 11 ರಿಂದ 8 ಕ್ಯೂಸೆಕ್ಸ್ ಗೆ ಇಳಿದಿದೆ
ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಎಚ್‌ಕೆ ಪಾಟೀಲ್, ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಗಳಾದ ಟಿಬಿ ಜಯಚಂದ್ರ, ಪ್ರಕಾಶ್ ಹುಕ್ಕೇರಿ, ಸಂಸದ ಡಿ ಕೆ ಸುರೇಶ್ ಮುಂತಾದವರು ಉಪಸ್ಥಿತರಿದ್ದರು.